ಬೇಸಿಗೆ ಬರುತ್ತಿರುವುದರಿಂದ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ.
(KOLARA): ಬಂಗಾರಪೇಟೆ : ಬೇಸಿಗೆಕಾಲ ಬರುತ್ತಿರುವ ಹಿನ್ನೆಲೆ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬರದಂತೆ ಇಂದು ಎಲ್ಲಾ ಅಧಿಕಾರಿಗಳನ್ನು ಕರೆಸಿ ಸಭೆಯನ್ನು ಮಾಡಲಾಗಿದೆ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ತಿಳಿಸಿದರು.
ತಾಲೂಕು ಕಚೇರಿಯ ಸಭಾಂಗಣದಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲಿಕ್ಕೆ ಮಂಗಳವಾರ 12 ಗಂಟೆಯಲ್ಲಿ ಕರೆದಿದ್ದ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳ ಸಭೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಒಟ್ಟಾರೆಯಾಗಿ ಯಾವುದೇ ಗ್ರಾಮಗಳಲ್ಲೂ ಸಹ ಕುಡಿಯುವ ನೀರು ಸಮಸ್ಯೆ ಆಗದಂತೆ, ಸಮಗ್ರವಾಗಿ ನಿರ್ವಹಣೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
ನಾನು ಸಹ ಕುಡಿಯುವ ನೀರಿನ ವಿಚಾರದಲ್ಲಿ ಪರಿಶೀಲನೆ ಮಾಡುತ್ತಿದ್ದೇನೆ ಯಾವುದೇ ಸಮಸ್ಯೆ ಬಾರದ ರೀತಿಯಲ್ಲಿ ಖಂಡಿತವಾಗಲೂ ಕ್ರಮವನ್ನು ತೆಗೆದುಕೊಳ್ಳುತ್ತೇನೆ ಗ್ರಾಮಾಂತರಾಗಬಹುದು, ನಗರ ವ್ಯಾಪ್ತಿಯಲ್ಲಾಗಬಹುದು, ಎಲ್ಲಾ ಕಡೆಯೂ ಸಹ ನೀರಿನ ಸಮಸ್ಯೆ ಬರದಂತೆ ಕ್ರಮಗಳನ್ನು ತೆಗೆದುಕೊಳ್ಳುತ್ತೇನೆ ಈ ವಿಚಾರವಾಗಿ ಎಲ್ಲಾ ಅಧಿಕಾರಿಗಳನ್ನು ಕರೆಸಿ ಚರ್ಚೆ ಮಾಡಿ ಸೂಕ್ತ ನಿರ್ದೇಶನಗಳನ್ನು ನೀಡಿದ್ದೇನೆ ಎಂದರು.
ಈಗಾಗಲೇ ತಾಲೂಕಿನಲ್ಲಿ ನಾಲ್ಕೈದು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಬಂದಿದೆ, ತಾಲೂಕಿನಲ್ಲಿ ಹೆಚ್ಚಿಗೆ ನೀರಿನ ಸಮಸ್ಯೆ ಇಲ್ಲ, ನೀರಿನ ಸಮಸ್ಯೆ ಹಾಗಿರುವ ಕಡೆ ಕೊಳವೆಬಾವಿಗಳನ್ನು ಕೊರಿಸಿ ಪಂಪು ಮೋಟರನ್ನು ಅಳವಡಿಸಲು ಸೂಚನೆ ನೀಡಲಾಗಿದೆ. ಹಾಗೂ ಕೆಲವು ಕಡೆ ವಿದ್ಯುತ್ ಶಕ್ತಿ ಕೊರತೆಗೆ ಅಲ್ಲಿಯೂ ಸಹ ಬೆಸ್ಕಾಂ ಇಂಜಿನಿಯರ್ ಜೊತೆ ಮಾತನಾಡಿ ಯಾವುದೇ ಸಮಸ್ಯೆ ಬರದಂತೆ ಸೂಚನೆಗಳನ್ನು ನೀಡಿದ್ದೇನೆ ಎಂದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ರಶ್ಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ರವಿಕುಮಾರ್, ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಯ ಅಭಿವೃದ್ಧಿ ಅಧಿಕಾರಿಗಳು ಭಾಗವಹಿಸಿದ್ದರು.
ವರದಿ: ವಿಷ್ಣು ಕೋಲಾರ