ಪೌಷ್ಟಿಕತೆಯ ಕೊರತೆಯಿಂದ ಮಕ್ಕಳಲ್ಲಿ ಕಲಿಕೆಯ ಆಸಕ್ತಿ ಕಡಿಮೆಯಾಗುತ್ತಿದೆ – ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪ
(SHIVAMOGA): ಸೊರಬ: ಮಕ್ಕಳಲ್ಲಿ ಕಲಿಕೆಯಲ್ಲಿ ಆಸಕ್ತಿ ಕುಗ್ಗಲು ಅಪೌಷ್ಟಿಕತೆ ಮುಖ್ಯ ಕಾರಣವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪ ತಿಳಿಸಿದರು.
ಪ್ರಧಾನಮಂತ್ರಿ ಶಕ್ತಿ ಯೋಜನೆ ಅಕ್ಷರ ದಾಸೋಹ ಮತ್ತು ಮಧ್ಯಾಹ್ನ ಉಪಹಾರ ಯೋಜನೆಯಡಿಯಲ್ಲಿ ರಾಜ್ಯ ಸರ್ಕಾರದೊಂದಿಗೆ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಸಹಭಾಗಿತ್ವದಲ್ಲಿ ಹಳೇ ಸೊರಬದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ತಾಲೂಕು ಮಟ್ಟದ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸುವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸದೃಢ ದೇಹದಲ್ಲಿ ಸದೃಢ ಮನಸ್ಸು ಬೆಳೆಯಲು ಪೌಷ್ಟಿಕತೆ ಅತ್ಯಂತ ಮುಖ್ಯವಾಗಿದೆ. ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ಪಾಠ ಗಮನಿಸಲು ಮತ್ತು ಕಲಿಕೆಯಲ್ಲಿ ಮುನ್ನಡೆಯಲು ತೊಂದರೆ ಉಂಟಾಗುತ್ತದೆ,ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸುವ ಯೋಜನೆ ಪ್ರಾರಂಭಿಸಿದ್ದು, ಇದರಿಂದ ಮಕ್ಕಳ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ ನೆರವು ಸಿಗಲಿದೆ. ಸರ್ಕಾರದ ಇತರ ಹಲವಾರು ಯೋಜನೆಗಳೊಂದಿಗೆ, ಇದು ಮಕ್ಕಳ ವಿದ್ಯಾಭ್ಯಾಸ ಮತ್ತು ಕಲಿಕೆಯನ್ನು ಉತ್ತೇಜನಗೊಳಿಸುವಲ್ಲಿ ಸಹಕಾರಿ ಎಂದರು.
ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಡಾ. ಕೆ.ಸಿ. ಶ್ರೀಕಾಂತ್ ಅವರು, ಮಧ್ಯಾಹ್ನ ಬಿಸಿಊಟ, ಹಾಲು, ರಾಗಿ ಮಾಲ್ಟ್, ಮತ್ತು ಮೊಟ್ಟೆ ವಿತರಣೆ ಕಾರ್ಯಕ್ರಮಗಳನ್ನು ಸರ್ಕಾರ ಎಲ್ಲ ಮಕ್ಕಳಿಗೂ ಪೌಷ್ಟಿಕ ಆಹಾರ ನೀಡುವ ಉದ್ದೇಶದಿಂದ ಜಾರಿಗೆ ತಂದಿದ್ದು, ಈ ಯೋಜನೆಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಲಾಭ ಪಡೆಯಲು, ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಪ್ರಭಾಕರ್, ನೌಕರರ ಸಂಘದ ಅಧ್ಯಕ್ಷ ಮಂಜುನಾಥ್, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಓಂಕಾರಪ್ಪ, ದೈಹಿಕ ಪರಿವೀಕ್ಷಕ ಲಿಂಗರಾಜ ಒಡೆಯರ್, ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.
ವರದಿ: ಮಧು ರಾಮ್ ಸೊರಬ