ಡಾ.ಬಿಆರ್ ಅಂಬೇಡ್ಕರ್ ಅವರು ಇಡೀ ವಿಶ್ವಕ್ಕೆ ಮೆಚ್ಚುವಂತಹ ಸಂವಿಧಾನ ರಚಿಸಿದ್ದಾರೆ, ಸೂಲಿಕುಂಟೆ ಆನಂದ್
(KOLARA): ಬಂಗಾರಪೇಟೆ :ದೇಶದಲ್ಲಿ ತಾಂಡವಾಡುತ್ತಿದ್ದ ಅಸೃಶ್ಯತೆ ಮತ್ತು ಜಾತೀಯತೆ ವಿರುದ್ಧ ಸಾಕಷ್ಟು ಹೋರಾಟ ನಡೆಸಿದ ಡಾ. ಬಿ.ಆರ್. ಅಂಬೇಡ್ಕರ್ ಅವರು ದಲಿತ ಸಮುದಾಯಗಳಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಇಡೀ ವಿಶ್ವಕ್ಕೆ ಮೆಚ್ಚುವಂತಹ ಸಂವಿಧಾನರಚಿಸಿದ್ದಾರೆ ಎಂದು ಕರ್ನಾಟಕ ದಲಿತ ಸಮಾಜ ಸೇನೆಯ ರಾಜ್ಯಾಧ್ಯಕ್ಷ ಸುಲಿಕುಂಟೆ ಆನಂದ್ ತಿಳಿಸಿದರು.
ಪಟ್ಟಣದಲ್ಲಿ ಅಂಬೇಡ್ಕರ್ ಅವರ ಪುತ್ಥಳಿಗೆ ಪುಷ್ಪನಮನ ಸಲ್ಲಿಸಿ ಮಾತನಾಡುತ್ತಾ,ಅಂಬೇಡ್ಕರ್ ಎಂದರೆ ಬರೀ ವ್ಯಕ್ತಿಯಲ್ಲ. ಅವರು ಮಹಾನ್ ಶಕ್ತಿ. ಧ್ಯೇಯ, ತತ್ವವೇ ಅಂಬೇಡ್ಕರ್ ಆಗಿದ್ದಾರೆ. ದೇಶದ ಅಖಂಡತೆಗೆ ಅವರ ಸೇವೆ ಅನನ್ಯವಾದುದು. ಅವರನ್ನು ಕೇವಲ ಶೋಷಿತ ವರ್ಗದ ನಾಯಕರು ಎಂದು ಭಾವಿಸುವಂತಿಲ್ಲ. ಅವರು ಸಮಾಜದ ಎಲ್ಲ ವರ್ಗಗಳ ನಾಯಕರಾಗಿದ್ದಾರೆ ಎಂದು ಹೇಳಿದರು.
ಅಂಬೇಡ್ಕರ್ ಅವರು ಸಂಘರ್ಷದ ಹಾದಿ ತುಳಿಯದೆ ಸಾಮರಸ್ಯದ ಮೂಲಕ ಸಮಾಜವು ಒಗ್ಗೂಡುವಂತೆ ಮಾಡಿದ್ದಾರೆ. ಅವರ ವ್ಯಕ್ತಿತ್ವ, ಆದರ್ಶಗಳನ್ನು ಪಾಲನೆ ಮಾಡುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕಿದೆ ಎಂದರು.
ಅಂಬೇಡ್ಕರ್ ರಚಿಸಿದ ಸಂವಿಧಾನದಲ್ಲಿ ಎಲ್ಲರಿಗೂ ಹಕ್ಕು ಮತ್ತು ಜವಾಬ್ದಾರಿ ನೀಡಲಾಗಿದೆ. ನಾಗರಿಕರ ಹಕ್ಕುಗಳನ್ನು ಪ್ರತಿಪಾದಿಸುವುದರ ಜತೆಗೆ ಗುರುತರ ಜವಾಬ್ದಾರಿ ನಿರ್ವಹಿಸಬೇಕಿದೆ. ಯುವಜನರು ಸಂವಿಧಾನದ ಆಶಯಗಳನ್ನು ಅರ್ಥೈಸಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.
‘ಅಂಬೇಡ್ಕರ್ ಅವರ ಹೆಸರು ಹೇಳುವುದೇ ರೋಮಾಂಚನ ಉಂಟು ಮಾಡುತ್ತದೆ. ಸಮಾನತೆ ದೃಷ್ಟಿಯಲ್ಲಿ ಸಂವಿಧಾನ ರಚಿಸಿದ ಮಹಾನ್ ಚೇತನ. ನಾವೆಲ್ಲರೂ ಜೀವನದಲ್ಲಿ ಅವರ ಚಿಂತನೆ ಅಳವಡಿಸಿಕೊಳ್ಳಬೇಕಿದೆ’ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡ ನಕ್ಕನಹಳ್ಳಿ ವೆಂಕಟೇಶ್, ದೇವಗಾನಹಳ್ಳಿ ನಾಗೇಶ್, ಆಟೋ ಕರ್ಣ, ಎಸ್ ವಿ ಮಂಜುನಾಥ್, ಸರವಣ, ಚಂದ್ರು,ಅಮ್ಜದ್,ಶಿವಕುಮಾರ್ ಮಾರಿಕೊಪ್ಪ ವೆಂಕಟೇಶ್,ಅರ್ಜುನ್ ಮೊದಲಾದವರು ಇದ್ದರು.
ವರದಿ ವಿಷ್ಣು ಕೋಲಾರ