ರೈತ ವಿರೋಧಿ, ಜನವಿರೋಧಿ ರಾಜ್ಯ ಸರ್ಕಾರದ ವಿರುದ್ಧದ ಪ್ರತಿಭಟನಾ ಸಭೆಗೆ ರೈತರು ಬೆಂಬಲಿಸಿ
(CHIKKAMAGALURU): ಮಲೆನಾಡು ಪ್ರದೇಶಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಖಂಡಿಸಿ ರೈತ ವಿರೋಧಿ, ಜನವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಪಕ್ಷ ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿ ಸೆ.2ರ ಸೋಮವಾರ ಆಯೋಜಿಸಿರುವ ಬೃಹತ್ ಪ್ರತಿಭಟನೆಗೆ ರೈತರು ಪಕ್ಷಾತೀತವಾಗಿ ಬೆಂಬಲಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಟಿ.ಎಂ.ಉಮೇಶ್ ಕಲ್ಮಕ್ಕಿ ಕರೆ ನೀಡಿದ್ದಾರೆ.
ಅರಣ್ಯ ಒತ್ತುವರಿ ತೆರವಿನ ಹೆಸರಿನಲ್ಲಿ ರೈತರ ನೆಮ್ಮದಿ ಕಸಿಯುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ, ಜೆಡಿಎಸ್ ಮೈತ್ರಿ ಪಕ್ಷಗಳು ಜಂಟಿಯಾಗಿ ಜನಜಾಗೃತಿಗಾಗಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಇದಕ್ಕೆ ಜನಸಾಮಾನ್ಯರು ಹಾಗೂ ರೈತರ ಬೆಂಬಲ ಅಗತ್ಯವಾಗಿ ಬೇಕಿದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಅರಣ್ಯ ಸಚಿವರು ಮಲೆನಾಡಿನ ನೈಜ ಸಮಸ್ಯೆಗಳನ್ನು ಅರಿಯದೆ ಇಲ್ಲಿನ ಜನರಿಗೆ ಮಾರಕವಾದ ನಿರ್ಧಾರವನ್ನು ಏಕಪಕ್ಷೀಯವಾಗಿ ಕೈಗೊಂಡಿದ್ದು, ಇಂತಹ ನಿರ್ಧಾರವನ್ನು ರೈತರು, ಜನಸಾಮಾನ್ಯರು ಒಕ್ಕೊರಲ ದನಿಯಿಂದ ಖಂಡಿಸಬೇಕಿದೆ.
ಈ ನಿಟ್ಟಿನಲ್ಲಿ ಜನರಲ್ಲಿ ಜಾಗೃತಿ ಮೂಡಿಸಬೇಕು ಹಾಗೂ ರಾಜ್ಯ ಸರ್ಕಾರದ ನಿರ್ಧಾರವನ್ನು ಖಂಡಿಸಬೇಕು. ರಾಜ್ಯ ಸರ್ಕಾರ ಇಂತಹ ಜನವಿರೋಧಿ ನಿರ್ಧಾರವನ್ನು ಕೈಬಿಡಬೇಕು ಎಂಬ ಆಗ್ರಹದೊಂದಿಗೆ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನೆಯಲ್ಲಿ ಮಾಜಿ ಸಚಿವ ಡಿ.ಎನ್.ಜೀವರಾಜ್, ಜೆಡಿಎಸ್ ನಾಯಕ ಸುಧಾಕರ ಶೆಟ್ಟಿ ಸೇರಿದಂತೆ ಭಾಗವಹಿಸಲಿದ್ದಾರೆ. ಪ್ರತಿಭಟನೆಯಲ್ಲಿ ರೈತರು, ಜನಸಾಮಾನ್ಯರು ಪಕ್ಷಾತೀತವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.