ಮಕ್ಕಳು ಜೀವನ ನಡೆಸಲು ವ್ಯವಹಾರ ಜ್ಞಾನದ ಅರಿವು ಮೂಡಿಸಬೇಕು.
(KOLARA): ಬಂಗಾರಪೇಟೆ :ತಾಲ್ಲೂಕಿನ ಬೂದಿಕೋಟೆಯ ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯಲ್ಲಿ ಆವರಣದಲ್ಲಿ ಇಂದು ನಡೆದ ಮಕ್ಕಳ ಸಂತೆಯಲ್ಲಿ ವ್ಯಾಪಾರ ಜೋರಾಗಿಯೆ ನಡೆಯಿತು.
ಸಂತೆಯಲ್ಲಿ ವಿವಿಧ ಬಗೆಯ ಸೊಪ್ಪು, ತರಕಾರಿ, ಬೇಲ್ಪುರಿ, ಬೋಂಡಾ, ಬಜ್ಜಿ, ಕಾಫಿ, ಟೀ ಸೇರಿದಂತೆ ಹಲವು ವಸ್ತುಗಳನ್ನು ಮಾರಾಟ ಮಾಡಲಾಯಿತು. ಮಕ್ಕಳು ಸಾರ್ವಜನಿಕರಿಗೆ ಮಾರುತ್ತಿದ್ದ ವಸ್ತುಗಳ ವ್ಯಾಪಾರ ನೈಜ ವ್ಯಾಪಾರಸ್ಥರನ್ನು ನಾಚಿಸುವಂತಿತ್ತು.
ಪರಸ್ಪರ ಸ್ವರ್ಧಾ ಮನೋಭಾವದಿಂದ ಮಕ್ಕಳು ನಾವೇ ಹೆಚ್ಚು ವ್ಯಾಪಾರ ಮಾಡಬೇಕು ಎಂಬ ಛಲದಿಂದ ಪೋಷಕರನ್ನು ಕರೆದು ತಮ್ಮ ಅಂಗಡಿಯ ಸಾಮಗ್ರಿ ಖರೀದಿಸಲು ಒತ್ತಾಯಿಸುತ್ತಿದ್ದರು.
ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಯ ಕಾರ್ಯದರ್ಶಿ ನರೇಶ್ ಮಕ್ಕಳ ಸಂತೆ ಹಾಗೂ ಫ್ಯಾನ್ಸಿ ಡ್ರೆಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ‘ಮಕ್ಕಳಲ್ಲಿ ವ್ಯಾವಹಾರ ಜ್ಞಾನ ಅಭಿವೃದ್ದಿಗೆ ಮಕ್ಕಳ ಸಂತೆ ಹೆಚ್ಚು ಪ್ರೇರಣೆ ನೀಡುತ್ತದೆ’ ಎಂದು ಅಭಿಪ್ರಾಯಪಟ್ಟರು.
‘ಮಕ್ಕಳನ್ನು ಪಠ್ಯಕ್ಕೆ ಸೀಮಿತ ಮಾಡುವುದು ಸರಿಯಲ್ಲ. ಸಮಗ್ರ ಶಿಕ್ಷಣದ ಭಾಗವಾಗಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ಎಂದರು.
‘ಮಕ್ಕಳು ಜೀವನ ನಡೆಸಲು ವ್ಯವಹಾರ ಜ್ಞಾನದ ಅರಿವು ಮೂಡಿಸಬೇಕು. ಪೋಷಕರು ಮಕ್ಕಳನ್ನು ಅಂಗಡಿಗೆ ಕಳುಹಿಸಿದರೆ ವ್ಯಾಪಾರ ಮಾಡಿ ಸಾಮಗ್ರಿ ತರುವ ಶಕ್ತಿ ಬೆಳೆಸಿಕೊಳ್ಳುತ್ತಾರೆ. ಇತ್ತೀಚಿನ ದಿನಗಳಲ್ಲಿ ವಾಣಿಜ್ಯ ಶಾಸ್ತ್ರಕ್ಕೆ ಬೇಡಿಕೆ ಹೆಚ್ಚುತ್ತಿದೆ. ಅನೇಕ ಉದ್ಯಮಗಳಲ್ಲಿ ವಾಣಿಜ್ಯ ಪದವಿಗೆ ಆದ್ಯತೆ ನೀಡಲಾಗುತ್ತಿದೆ. ಮಕ್ಕಳಲ್ಲಿ ಪ್ರಾಯೋಗಿಕವಾಗಿ ವ್ಯವಹಾರ ಜ್ಞಾನ ಬೆಳೆಸಲು ನಮ್ಮ ಶಾಲೆಯಲ್ಲಿ ಮಕ್ಕಳ ಸಂತೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಅಧ್ಯಕ್ಷರಾದ ಕಲೈವಾಣಿ,ಪ್ರಾಂಶುಪಾಲರಾದ ಕೀರ್ತಿ, ಶಾಲೆಯ ಮುಖ್ಯೋಪಾಧ್ಯಾಯರಾದ ರಾಜಕುಮಾರ್, ಶಿಕ್ಷಕರಾದ ಭಾರತಿ, ನಾಗಲಕ್ಷ್ಮಿ, ಇನ್ನು ಮೊದಲಾದವರು ಇದ್ದರು.
ವರದಿ: ವಿಷ್ಣು ಕೋಲಾರ