ಅರಣ್ಯ ಒತ್ತುವರಿ ತೆರವು ಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ
( ಬೆಂಗಳೂರು – ಸೆ – 06): ಅರಣ್ಯ ಒತ್ತುವರಿ ತೆರವು ಮಾಡುವಂತೆ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಸೂಚನೆ ನೀಡಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ-ವನ್ಯಜೀವಿ ಸಂಘರ್ಷ ತಡೆಯಲು ವನ್ಯಪ್ರಾಣಿಗಳು ನಾಡಿಗೆ ಬರದಂತೆ ವೈಜ್ಞಾನಿಕ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಹಾಗೂ ಅರಣ್ಯ ಒತ್ತುವರಿ ತೆರವು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಂಗಳವಾರ ಗೃಹ ಕಚೇರಿಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ತಡೆಯುವ ಸಂಬಂಧ ಅರಣ್ಯ ಇಲಾಖೆ ಸಚಿವ ಈಶ್ವರ ಖಂಡ್ರೆ ಹಾಗೂ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಭಾರೀ ಪ್ರಮಾಣದಲ್ಲಿ ಅರಣ್ಯ ಭೂಮಿ ಒತ್ತುವರಿಯಾಗಿರುವ ಪ್ರಕರಣಗಳನ್ನು ಪತ್ತೆ ಹಚ್ಚಿ ತೆರವುಗೊಳಿಸಲು ಸೂಚಿಸಿದರು.
ರಾಜ್ಯದಲ್ಲಿ ಕಳೆದ 15 ದಿನಗಳ ಅವಧಿಯಲ್ಲಿ 11 ಜನರು ಆನೆ ದಾಳಿಗೆ ಬಲಿಯಾಗಿದ್ದಾರೆ. ಅದೇ ರೀತಿ ಸೋಮವಾರ ನಾಗರಹೊಳೆ ಅರಣ್ಯ ಪ್ರದೇಶದ ಹೆಗ್ಗಡದೇವನಕೋಟೆ ತಾಲ್ಲೂಕಿನ ಗ್ರಾಮದಲ್ಲಿ ಕೃಷ್ಣನಾಯಕ್ ಎಂಬ ಬಾಲಕನನ್ನು ಹುಲಿ ಹೊತ್ತೊಯ್ದಿರುವ ಬಗ್ಗೆ ಅವರು ಕಳವಳ ವ್ಯಕ್ತಪಡಿಸಿದರು. ಹಾಸನದಲ್ಲಿ ಆನೆಗಳ ಅರಿವಳಿಕೆ ತಜ್ಞ ವೆಂಕಟೇಶ್ ಅವರು ಆನೆ ತುಳಿತದಿಂದ ಸಾವಿಗೀಡಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ಗಾಯಾಳು ಆನೆಗೆ ಚಿಕಿತ್ಸೆ ನೀಡುವಾಗ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲಾಗಿತ್ತೇ ಎಂದು ಖಾರವಾಗಿ ಪ್ರಶ್ನಿಸಿ, ಈ ಬಗ್ಗೆ ಹಾಸನ ಡಿಎಫ್ಒ ಅವರಿಗೆ ಕಾರಣ ಕೇಳಿ ನೊಟೀಸ್ ನೀಡುವಂತೆ ನಿರ್ದೇಶನ ನೀಡಿದರು.
ಹೆಚ್ಚು ಒತ್ತುವರಿ ಹಾಗು ಪ್ರಣಿ/ಮಾನವ ಸಂಘರ್ಷ ಹೆಚ್ಚು ಕಂಡುಬರುವುದು ಮಲೆನಾಡು ಭಾಗದಲ್ಲಿ. ಅದರಿಂದ ಮಲೆನಾಡು ಭಾಗದ ರೈತರಿಗೆ ನಡುಕ ಉಂಟಾಗಿದೆ.