ಹೆಣ್ಣು ಸಬಲರಾದರೆ ಸಮಾಜ ಸದೃಢ
(CHIKKAMAGALURU): ಹೆಣ್ಣು ಮಕ್ಕಳು ಉತ್ತಮ ಶಿಕ್ಷಣ ಪಡೆದು ಸಬಲರಾದರೆ ಸಮಾಜ ಸದೃಢವಾಗಿ ನಿರ್ಮಾಣವಾಗಲಿದೆ ಎಂದು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ತಮನ್ನಾ ಮುನಾವರ್ ಹೇಳಿದರು. ಪಟ್ಟಣದ ಜೇಸಿಐ ಬಾಳೆಹೊನ್ನೂರು ಕ್ಲಾಸಿಕ್ ಸಂಸ್ಥೆಯ ವತಿಯಿಂದ ನಿರ್ಮಲಾ ಕಾನ್ವೆಂಟ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೇಂದ್ರ ಸರ್ಕಾರವು ಜ.24ನ್ನು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವೆಂದು ಘೋಷಿಸಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟಾçದ್ಯಂತ ಹೆಣ್ಣು ಮಕ್ಕಳ ಬ್ರೂಣ ಹತ್ಯೆ, ಕೌಟುಂಬಿಕ ದೌರ್ಜನ್ಯ, ಮಹಿಳೆ ಮತ್ತು ಹೆಣ್ಣು ಮಕ್ಕಳ ನ್ಯೂನ ಪೋಷಣೆ, ಶಿಕ್ಷಣ ಮುಂತಾದ ಸಮಸ್ಯೆಗಳ ಬಗ್ಗೆ ಅರಿವನ್ನು ನೀಡಲಾಗುತ್ತಿದೆ.
ಲಿಂಗ ಅಸಮಾನತೆಯನ್ನು ಹೋಗಲಾಡಿಸಿ ಹೆಣ್ಣಿಗೆ ಸಮಾನ ಅವಕಾಶ ಹಾಗೂ ಪ್ರೋತ್ಸಾಹ ನೀಡಬೇಕೆಂಬ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಹೆಣ್ಣು ಮಕ್ಕಳನ್ನು ಸಮಾಜದಲ್ಲಿ ಸಮಾನತೆಯಿಂದ ಕಂಡು ಅವರಿಗೂ ಮೌಲ್ಯ, ಗೌರವವನ್ನು ತೋರಿಸುವ ಸಲುವಾಗಿ ಆ ಭಾವನೆ ಜನರಲ್ಲಿ ಮೂಡಿಸಲು ಈ ದಿನ ಪೂರಕವಾಗಿದೆ.
ಹೆಣ್ಣು ಮಕ್ಕಳು ಸಮಾಜದಲ್ಲಿ ಬಾಲ್ಯವಿವಾಹ, ಹೆಣ್ಣು ಭ್ರೂಣ ಹತ್ಯೆ, ಲಿಂಗತಾರತಮ್ಯ, ಅನಕ್ಷರತೆ, ಅತ್ಯಾಚಾರ, ಲೈಂಗಿಕ ಕಿರುಕುಳ ಇನ್ನಿತರ ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಹೆಣ್ಣು ಇಂಥ ಸಮಸ್ಯೆಗಳನ್ನು ಎದುರಿಸಿ ಶಿಕ್ಷಣವಂತರಾಗಬೇಕು. ಮೂಢನಂಬಿಕೆಗಳನ್ನು ದೂರವಿಟ್ಟು ಆತ್ಮಸ್ಥೈರ್ಯ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬೇಕಾಗಿದೆ.
ಹೆಣ್ಣುಮಕ್ಕಳ ರಕ್ಷಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೇಟಿ ಬಚಾವೋ ಬೇಟಿ ಪಡಾವೋ, ಸುಕನ್ಯ ಸಮೃದ್ಧಿ ಯೋಜನೆ, ಭಾಗ್ಯಲಕ್ಷ್ಮಿ ಯೋಜನೆಗಳಂಥ ಹಲವು ಯೋಜನೆಗಳನ್ನು ಕೈಗೊಂಡಿದೆ. ಹೆಣ್ಣು ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯ ತಡೆಗೆ ಅನೇಕ ಕಠಿಣ ಕಾನೂನನ್ನು ಜಾರಿಗೆ ತರಲಾಗಿದೆ.