ಉಡುಪಿನ್ಯೂಸ್

ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ

ಅಜ್ಜರಕಾಡು ಕ್ರೀಡಾಂಗಣದಲ್ಲಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಕಚೇರಿ ಉದ್ಘಾಟನೆ

(UDUPI):ಕ್ರೀಡಾ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ಮತ್ತು ಕ್ರೀಡಾಪಟುಗಳಿಗೆ ಸುಧಾರಿತ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಅಜ್ಜರಕಾಡು ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್‌ನ ಅಧಿಕೃತ ಜಿಲ್ಲಾ ಕಚೇರಿಯನ್ನು ರಾಜ್ಯ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಉದ್ಘಾಟಿಸಿದರು.

ಕ್ರೀಡಾ ಚಟುವಟಿಕೆಗಳು ಯುವಜನರ ಶಾರೀರಿಕ ಮತ್ತು ಮಾನಸಿಕ ಅಭಿವೃದ್ಧಿಗೆ ಅಗತ್ಯವಾಗಿದೆ. ಈ ಕಚೇರಿಯು ಕ್ರೀಡಾಪಟುಗಳಿಗೆ ಮಾರ್ಗದರ್ಶಕವಾಗಿದ್ದು, ಜಿಲ್ಲೆಯನ್ನು ಕ್ರೀಡಾ ಕ್ಷೇತ್ರದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಿದೆ. ರಾಜ್ಯ ಸರ್ಕಾರವು ಕ್ರೀಡಾ ಕ್ಷೇತ್ರದ ಪ್ರಗತಿಗೆ ಬದ್ಧವಾಗಿದೆ. ನಿಮ್ಮ ಪರಿಶ್ರಮದಿಂದ ಜಿಲ್ಲೆಗೆ ಹೆಮ್ಮೆ ತರುವ ಸಾಧನೆಗಳನ್ನು ಮಾಡಬೇಕೆಂದು ಆಶಿಸುತ್ತೇನೆ ಎಂದರು.

ಈ ಸಂದರ್ಭದಲ್ಲಿ ಸೊರಬ HPR ನರ್ಸಿಂಗ್ ಕಾಲೇಜು ಮತ್ತು ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್‌ನ ಅಧ್ಯಕ್ಷರಾದ ಹರಿಪ್ರಸಾದ್ ರೈ ಅವರು ಮಾತನಾಡಿ ಈ ಕಚೇರಿ ಕ್ರೀಡಾಪಟುಗಳಿಗೆ ಉತ್ತಮ ಮಾರ್ಗದರ್ಶನ ಮತ್ತು ತರಬೇತಿ ಶಿಬಿರದ ಕಾರ್ಯಕ್ರಮಗಳು, ಮತ್ತು ಕ್ರೀಡಾ ಚಟುವಟಿಕೆಗಳನ್ನು ಸಮರ್ಪಕವಾಗಿ ಯೋಜನೆ ಮಾಡಲು ಸಹಾಯ ಮಾಡಲಿದೆ. ಜಿಲ್ಲೆಯಲ್ಲಿ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯವಾದ ಮೂಲಸೌಕರ್ಯಗಳನ್ನು ಹೆಚ್ಚಿಸಲು ಒಂದು ಪ್ರಮುಖ ಹೆಜ್ಜೆಯಾಗಿ ಪಾತ್ರ ವಹಿಸಲಿದೆ ಎಂದರು.

ಈ ಕಾರ್ಯಕ್ರಮದ ನಂತರ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಹರಿಪ್ರಸಾದ್ ರೈ ಅವರ ನಿವಾಸಕ್ಕೆ ತೆರಳಿ, ಕಾಂಗ್ರೆಸ್ ಪಕ್ಷದ ಬಲವರ್ಧನೆ ಕುರಿತಂತೆ ಚರ್ಚಿಸಿದರು. ಚರ್ಚೆಯ ವೇಳೆ ಪಕ್ಷದ ಸಂಘಟನೆ ಮತ್ತು ಕ್ಷೇತ್ರ ಮಟ್ಟದ ಬಲವರ್ಧನೆಗೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿ. ಚರ್ಚೆ ನಂತರ ಸಚಿವರು ಟೀ ಸೇವಿಸಿ, ಅಲ್ಲಿಂದ ಕೇಂದ್ರ ಸ್ಥಳಕ್ಕೆ ತೆರಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ ಮತ್ತು ಅಭಯಚಂದ್ರ ಜೈನ್, ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉದಯ ಕುಮಾರ್ ಶೆಟ್ಟಿ ಮುನಿಯಾಲು ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ವರದಿ: ಮಧು ರಾಮ್ ಸೊರಬ

Leave a Reply

Your email address will not be published. Required fields are marked *

Scan the code