ನ್ಯೂಸ್ರಾಜ್ಯ

ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು-ಸಿದ್ದರಾಮಯ್ಯ

ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು-ಸಿದ್ದರಾಮಯ್ಯ


(DAVANAGERE): ದಾವಣಗೆರೆ:ಜನ ಸಾಮಾನ್ಯರು ಪತ್ರಿಕಾ ವೃತ್ತಿ ಮೇಲೆ ಬಹಳ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಆ ನಿರೀಕ್ಷೆಗಳು ಹುಸಿಯಾಗದಂತೆ ಪತ್ರಕರ್ತರು ವೃತ್ತಿಪರತೆ ಬೆಳೆಸಿಕೊಳ್ಳಬೇಕು. ಈಗ ತಂತ್ರಜ್ಞಾನ , ವಿಜ್ಞಾನ ಬಹಳ ಬೆಳೆದಿದ್ದು ಇದರ ಪ್ರಯೋಜನವನ್ನು ಪತ್ರಿಕಾವೃತ್ತಿ ಬಳಸಿಕೊಳ್ಳಬೇಕಿದೆ. ಆದರೆ ಸತ್ಯನಿಷ್ಠೆಯನ್ನು ಯಾವುದೇ ಕಾರಣಕ್ಕೂ ಪತ್ರಕರ್ತರು ಬಿಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.


ದಾವಣಗೆರೆಯ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹಮ್ಮಿಕೊಂಡಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಿ. ಗಂಡ-ಹೆಂಡತಿ ಜಗಳವನ್ನು ಇಡೀ ದಿನ ತೋರಿಸುವುದಕ್ಕಿಂತ, ಸಮಾಜದ ಬೆಳೆವಣಿಗೆಗೆ ಅಡ್ಡಿ ಆಗಿರುವ ಪಟ್ಟ ಭದ್ರರನ್ನು ಗುರುತಿಸಿ ಬರೆಯಿರಿ. ಇದರಿಂದ ಸಮಾಜಮುಖಿ ಪತ್ರಿಕೋದ್ಯಮ ಸಾಧ್ಯ ಎಂದರು. ಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾಗಿದ್ದು, ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ ಗ್ಯಾರಂಟಿ ಎಂದು ಕರೆಯಬಾರದು ಎಂದರು.
ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮಾತನಾಡಿ, ಸಮಾಜದ ಬೆಳವಣಿಗೆಯಲ್ಲಿ ಪತ್ರಕರ್ತರ ಪಾತ್ರ ಮಹತ್ತರವಾಗಿದೆ. ಸುದ್ದಿ ಮಾಧ್ಯಮಗಳು ಅತ್ಯಂತ ಜವಾಬ್ದಾರಿಯುತವಾಗಿ ವಸ್ತುನಿಷ್ಠ ವರದಿಯನ್ನು ಬಿತ್ತರಿಸುವ ಕೆಲಸ ಮಾಡಬೇಕು ಎಂದ ಅವರು ಎಲ್ಲಾ ಪತ್ರಕರ್ತರಿಗೆ ಬಸ್ ಪಾಸ್ ವಿತರಿಸುವ ನೀಡುವ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು ಎಂದರು.


ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ ಸಮಾಜ ನಮ್ಮನ್ನು ಪ್ರತಿಕ್ಷಣ ಗಮನಿಸುತ್ತಿರುತ್ತದೆ, ಪತ್ರಕರ್ತರು ಅತ್ಯಂತ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕಿದೆ, ಸುದ್ದಿ ಭರಾಟೆಯ ಮಧ್ಯೆ ನೈಜ ಸುದ್ದಿಗಳಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಎಲ್ಲಾ ಪತ್ರಕರ್ತರು ಕಾರ್ಯನಿರ್ವಹಿಸಬೇಕಿದೆ ಎಂದ ಅವರು ಗ್ರಾಮೀಣ ಭಾಗದ ಪತ್ರಕರ್ತರ ಬಗ್ಗೆ ಸರ್ಕಾರ ಗಮನ ಹರಿಸಬೇಕು, ಆ ನಿಟ್ಟಿನಲ್ಲಿ ಬಸ್ ಪಾಸ್ ವಿತರಿಸಲು ಮುಂದಾಗಬೇಕು, ಪತ್ರಕರ್ತರಿಗೆ ಅರೋಗ್ಯ ಯೋಜನೆ ಘೋಷಿಸಬೇಕು, ಸಣ್ಣ, ದೊಡ್ಡ ಪತ್ರಿಕೆ ಎಂಬ ತಾರತಮ್ಯ ಮಾಡದೆ ಜಾಹೀರಾತು ನೀಡಬೇಕು ಎಂದು ಒತ್ತಾಯಿಸಿದರು.
ಸಚಿವ ಎಸ್.ಎಸ್ ಮಲ್ಲಿಕಾರ್ಜುನ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಡಿ.ಜಿ ಶಾಂತನಗೌಡರ, ದೇವೇಂದ್ರಪ್ಪ, ಮಹಾಪೌರ ವಿನಾಯಕ ಪೈಲ್ವಾನ್ ಸೇರಿದಂತೆ ರಾಜ್ಯ ಸಂಘ, ದಾವಣಗೆರೆ ಜಿಲ್ಲಾ ಸಂಘದ ಪಧಾಧಿಕಾರಿಗಳು ಮತ್ತಿತರರಿದ್ದರು.

ವರದಿ: ಸಂದೀಪ ಯು.ಎಲ್ ಸೊರಬ

Leave a Reply

Your email address will not be published. Required fields are marked *

Scan the code