ಅನಿರ್ದಿಷ್ಟಾವಧಿ ಹೋರಾಟಕ್ಕೆ ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ 500ಕ್ಕೂ ಹೆಚ್ಚು ಜನ ಪ್ರಯಾಣ.
(KOLARA): ಬಂಗಾರಪೇಟೆ :ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದ ನೇತೃತ್ವದಲ್ಲಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಬೆಂಗಳೂರು ಚಲೋ ಕಾರ್ಯಕ್ರಮಕ್ಕೆ ಪಟ್ಟಣದಿಂದ ಸುಮಾರು 500ಕ್ಕೂ ಹೆಚ್ಚು ಜನ ಬಸ್ಸಿನ ಮುಖಾಂತರ ಪ್ರಯಾಣ ಮಾಡುತಿದ್ದೇವೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಪಿಡಿಒ ನೌಕರರ ಸಂಘದ ಅಧ್ಯಕ್ಷ ವೇಣು ತಿಳಿಸಿದರು.
ಬೆಂಗಳೂರು ಚಲೋ ಕಾರ್ಯಕ್ರಮದ ಬಸ್ ಗಳಿಗೆ ಚಾಲನೆ ನೀಡಿ ಮಾತನಾಡಿ, ಪಿಡಿಒಗಳ ಹುದ್ದೆ ಗೆಜೆಟೆಡ್ ಗ್ರೂಪ್ ಬಿ ದರ್ಜೆಗೆ ಉನ್ನತೀಕರಣ, ನರೇಗಾ ಯೋಜನೆ ಅನುಷ್ಠಾನಗೊಳಿಸುವ ಗುರಿ ನಿಗದಿ ಕೈಬಿಡುವುದು, ಕೂಸಿನ ಮನೆ ಮುಂದುವರಿಸದಿರುವುದು, ಅಗತ್ಯ ಲೆಕ್ಕ ಸಹಾಯಕರು, ತಾಂತ್ರಿಕ ಸಿಬ್ಬಂದಿ ನೇಮಕ, ಜೇಷ್ಠಾತಾ ಪಟ್ಟಿ ಹಾಗೂ ಬಡ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ, ಕುಂದುಕೊರತೆ ಪ್ರಾಧಿಕಾರವನ್ನು ಪೊಲೀಸ್ ಇಲಾಖೆಯ ಮಾದರಿಯಲ್ಲಿ ಸದೃಢಗೊಳಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ಆದರೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ನಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಇಂದು ರಾಜ್ಯಾದ್ಯಂತ ಎಲ್ಲ ನೌಕರರು ಭಾಗವಹಿಸುತ್ತಿದ್ದೇವೆ ಎಂದರು.
ಪಟ್ಟಣದಿಂದ 500ಕ್ಕೂ ಅಧಿಕ ಸಿಬ್ಬಂದಿ ಭಾಗವಹಿಸಲಿದ್ದಾರೆ. ಧರಣಿ ದಿನಗಳಲ್ಲಿ ಕುಡಿಯುವ ನೀರು, ಬೀದಿ ದೀಪಗಳಿಗೆ ವಿದ್ಯುತ್ ಪೂರೈಕೆ ಹೊರತುಪಡಿಸಿ ಉಳಿದೆಲ್ಲ ಕೆಲಸ ಸ್ಥಗಿತಗೊಳಿಸುವೆವು ಎಂದರು.
ಈ ಸಂದರ್ಭದಲ್ಲಿ ಕಂಪ್ಯೂಟರ್ ಆಪರೇಟರ್ ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್, ತಾಲೂಕು ಅಧ್ಯಕ್ಷ ಕೇದಾರನಾಥ್, ಜಲಗಾರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರ್, ಮಧುಚಂದ್ರ, ಭಾಸ್ಕರ್, ಸರಸ್ವತಿ, ವಾಣಿ, ಚಿತ್ರ, ಚಂದ್ರಕಲಾ, ದೇವರಾಜ್ ಇದ್ದರು.
ವರದಿ: ವಿಷ್ಣು ಕೋಲಾರ