ದೈಹಿಕ ಶಿಕ್ಷಕರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ಎಸ್ಎನ್ ನಾರಾಯಣಸ್ವಾಮಿ ರವರಿಗೆ ಮನವಿ ಪತ್ರ ಸಲ್ಲಿಕೆ
(KOLARA): ಬಂಗಾರಪೇಟೆ :ಎಲ್.ಆರ್.ವೈದ್ಯನಾಥನ್ ವರದಿಯಂತೆ ದೈಹಿಕ ಶಿಕ್ಷಣ ಶಿಕ್ಷಕರನ್ನು ಸಹ ಶಿಕ್ಷಕರೆಂದು ಪರಿಗಣಿಸಬೇಕು. ಅವರಿಗೆ ಸಿಗುವ ಎಲ್ಲಾ ಸೌಲಭ್ಯಗಳನ್ನು ದೈಹಿಕ ಶಿಕ್ಷಣ ಶಿಕ್ಷಕರಿಗೂ ಕಲ್ಪಿಸಬೇಕು.ಅವರನ್ನೂ ಮುಖ್ಯೋಪಾಧ್ಯಾಯ ಹುದ್ದೆಗೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ತಾಲೂಕು ಸಂಘದ ಸದಸ್ಯರು ಶಾಸಕ ಎಸ್ಎನ್ ನಾರಾಯಣಸ್ವಾಮಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪಟ್ಟಣದ ಜೂನಿಯರ್ ಕಾಲೇಜ್ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕ್ರೀಡಾಕೂಟದ ಸಂದರ್ಭದಲ್ಲಿ ಶಾಸಕರಿಗೆ ಮನವಿ ಪತ್ರ ಸಲ್ಲಿಸಿ ಮಾತನಾಡಿದ, ದೈಹಿಕ ಶಿಕ್ಷಕಿ ಯುವರಾಣಿ ‘ಸರ್ಕಾರ 17 ವರ್ಷಗಳ ಹಿಂದೆಯೇ ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರು ಎಂದು ಪರಿಗಣಿಸುವ ಆದೇಶ ಮಾಡಿದೆ ಆದರೆ, ಶಿಕ್ಷಣ ಇಲಾಖೆ ಇದುವರೆಗೂ ಅದನ್ನು ಅನುಷ್ಠಾನಗೊಳಿಸದೇ ದೈಹಿಕ ಶಿಕ್ಷಕರಿಗೆ ಅನ್ಯಾಯ ಮಾಡುತ್ತಿದೆ. ಕೂಡಲೇ ಈ ಆದೇಶವನ್ನು ಅನುಷ್ಠಾನಗೊಳಿಸಬೇಕು.ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ದೈಹಿಕ ಶಿಕ್ಷಕರ ಪಾತ್ರ ಮುಖ್ಯ.ಆದರೆ ರಾಜ್ಯದ ಬಹುತೇಕ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ದೂರಿದರು.
ಸಮಾನ ವೇತನ ಸಮಾನ ವಿದ್ಯಾರ್ಹತೆ ಇದ್ದರೂ ಶಾಲಾ ಶಿಕ್ಷಣ ಇಲಾಖೆಯ ಸಹ ಶಿಕ್ಷಕರಿಗೆ ಸಿಗುವ ಸೌಲಭ್ಯ,ಬಡ್ತಿಗಳು ದೈಹಿಕ ಶಿಕ್ಷಕರಿಗೆ ಸಿಗುತ್ತಿಲ್ಲ ಪ್ರತ್ಯೇಕ ದೈಹಿಕ ಶಿಕ್ಷಣ ನಿರ್ದೇಶನಾಲಯ ಸ್ಥಾಪಿಸಬೇಕು.ಮಕ್ಕಳ ಅನುಪಾತಕ್ಕೆ ಅನುಗುಣವಾಗಿ ದೈಹಿಕ ಶಿಕ್ಷಕರನ್ನು ನೇಮಿಸುವ ನಿಯಮ ಬದಲಿಸಬೇಕು. ಪದವಿಪೂರ್ವ ಕಾಲೇಜುಗಳಲ್ಲೂ ದೈಹಿಕ ಶಿಕ್ಷಣ ಉಪನ್ಯಾಸಕರ ಹುದ್ದೆ ಸೃಜಿಸಬೇಕು ಆಗ್ರಹಿಸಿದರು.
ಆಗಸ್ಟ್ 29 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದ ಸತ್ಯಾಗ್ರಹದಲ್ಲಿ ತೆಗೆದುಕೊಂಡ ನಿರ್ಣಯದಂತೆ ಅಕ್ಟೋಬರ್ 2ರ ಒಳಗಾಗಿ ದೈಹಿಕ ಶಿಕ್ಷಣ ಶಿಕ್ಷಕರ ಬೇಡಿಕೆಗಳು ಈಡೇರದಿದ್ದಲ್ಲಿ ಮುಂದೆ ಅನಿರ್ದಿಷ್ಟ ಅವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು. ಈ ಸಂದರ್ಭದಲ್ಲಿ ತಾಲೂಕು ಮಟ್ಟದ ಎಲ್ಲಾ ದೈಹಿಕ ಶಿಕ್ಷಕರು ಭಾಗವಹಿಸಿದ್ದರು.
ವರದಿ: ವಿಷ್ಣು ಕೋಲಾರ