ಕೋಲಾರನ್ಯೂಸ್ರಾಜಕೀಯ

ಕೇಂದ್ರ ಮೋದಿ ಸರ್ಕಾರ ತನ್ನ 10 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ.

ಕೇಂದ್ರ ಮೋದಿ ಸರ್ಕಾರ ತನ್ನ 10 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಿದೆ.

(KOALRA): ಬಂಗಾರಪೇಟೆ: ಕೇಂದ್ರ ಮೋದಿ ಸರ್ಕಾರ ತನ್ನ 10 ವರ್ಷಗಳ ಅವಧಿಯಲ್ಲಿ ರಾಜ್ಯಕ್ಕೆ ಕೊಡಬೇಕಾದ ಅನುದಾನವನ್ನು ನೀಡದೆ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದೆ ಅನ್ಯಾಯ ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಮಾಡಿದರು.

ಪಟ್ಟಣದಲ್ಲಿ ಆಯೋಜಿಸಿದ್ದ ಲೋಕಸಭೆ ಚುನಾವಣೆಯ ಹಿನ್ನೆಲೆ ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ಬೃಹತ್ ರೋಡ್ ಶೋ ನಲ್ಲಿ ಭಾಗವಹಿಸಿ ಮಾತನಾಡಿ,
ಚಿಕ್ಕಬಳ್ಳಾಪುರದಲ್ಲಿ ಹಾಲಿ ಪ್ರಧಾನಿ ನರೇಂದ್ರ ಮೋದಿಯವರು, ಮಾಜಿ ಪ್ರಧಾನಿ ದೇವೇಗೌಡರು ಒಟ್ಟಾಗಿ ಜಿಲ್ಲೆಯ ಜನತೆಗೆ ಜೋಡಿ ಸುಳ್ಳುಗಳನ್ನು ಹೇಳಿ ಹೋಗಿದ್ದಾರೆ.
ಮೋದಿ ಕೊಟ್ಟ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಎಂದು ದೇವೇಗೌಡರು ರೈಲು ಬಿಟ್ಟಿದ್ದಾರೆ. ಖಾಲಿ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದರೆ ರಾಜ್ಯದ ಪಾಲಿನ ತೆರಿಗೆ ಹಣ ವಾಪಾಸ್ ಯಾಕೆ ಬರ್ಲಿಲ್ಲ? ಬರಗಾಲದ ಅನುದಾನ ಏಕೆ ಬರಲಿಲ್ಲ? ಪ್ರವಾಹದ ವೇಳೆ ರಾಜ್ಯದ ಅನುದಾನ ಏಕೆ ಬರಲಿಲ್ಲ ಎಂದು ಪ್ರಶ್ನೆ ಮಾಡಿದರು.

ಸನ್ಮಾನ್ಯ ದೇವೇಗೌಡರೇ,ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ರಾಜ್ಯದ ರೈತರ ಸಾಲ ಏಕೆ ಮನ್ನಾ ಮಾಡುತ್ತಿಲ್ಲ?ಮೋದಿಯವರ ಚೊಂಬು ನಿಮಗೆ ಅಕ್ಷಯ ಪಾತ್ರೆಯಂತೆ ಕಾಣಿಸಿದ್ರೆ, ಮೋದಿಯವರೇಕೆ ರಾಜ್ಯದ ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡುತ್ತಿಲ್ಲ ಎಂದು ಹೇಳಿದರು.

ಮೋದಿಯವರ ಚೊಂಬು ಅತ್ಯಂತ ಶ್ರೀಮಂತರ, ಉದ್ಯಮಿಗಳ ಲಕ್ಷ ಲಕ್ಷ ಕೋಟಿ ಸಾಲ ಮನ್ನಾ ಮಾಡಿದರು. ಇದು ಅತೀ ಶ್ರೀಮಂತರ ಅಕ್ಷಯ ಪಾತ್ರೆ. ಭಾರತೀಯರ ಪಾಲಿಗೆ, ನಾಡಿನ ಜನರ ಪಾಲಿಗೆ ಖಾಲಿ ಚೊಂಬು ಅಷ್ಟೆ ಅಲ್ವಾ ದೇವೇಗೌಡರೇ?ಹದಿನೈದನೇ ಹಣಕಾಸು ಆಯೋಗದಲ್ಲಿ ರಾಜ್ಯಕ್ಕೆ ಮಾಡಿದ ಮೋಸವನ್ನು ಮೋದಿಯವರ ಖಾಲಿ ಚೊಂಬು ಸಾಕ್ಷಿಯಾಗಿದೆ. ದೇವೇಗೌಡರೇ ಈ ಚೊಂಬು ನಿಮ್ಮ ಕಣ್ಣಿಗೆ ಅಕ್ಷಯ ಪಾತ್ರೆಯಾಗಿದ್ದರೆ 15ನೇ ಹಣಕಾಸು ಆಯೋಗದಲ್ಲಿ‌ ಆಗಿರುವ ನಷ್ಟ, ಅನ್ಯಾಯವನ್ನು ತುಂಬಿ ಕೊಡಿಸಿ. ಅಕ್ಷಯ ಪಾತ್ರೆಯಿಂದ ಉದುರಿಸಿ ನೋಡೋಣ ಎಂದರು.

ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಗೌತಮ್ ಗೆಲುವು ನಿಶ್ಚಿತವಾಗಿದೆ. ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಹೆಚ್ಚು ಬಹುಮತ ನೀಡಿ ಶಾಸಕ ನಾರಾಯಣಸ್ವಾಮಿಯವರಿಗೆ ಹೆಚ್ಚಿನ ಶಕ್ತಿ ನೀಡಿ ಎಂದು ಮನವಿ ಮಾಡಿದರು.

ಬರ – ನೆರೆ ಪರಿಹಾರದಲ್ಲಿ, ವಿಶೇಷ ಅನುದಾನದಲ್ಲಿ, ತೆರಿಗೆ ಹಂಚಿಕೆಯಲ್ಲಿ, ವಿದೇಶದಿಂದ ಕಪ್ಪುಹಣ ತಂದು ಎಲ್ಲರ ಖಾತೆಗೆ ಹಾಕಬೇಕಿದ್ದ ₹15 ಲಕ್ಷದಲ್ಲಿ ಸಿಕ್ಕಿದ್ದು ಚೊಂಬು.
ಪ್ರಧಾನಿ ನರೇಂದ್ರ ಮೋದಿಯವರ ಹತ್ತು ವರ್ಷಗಳ ಆಡಳಿತದಲ್ಲಿ ಕರ್ನಾಟಕಕ್ಕೆ ಸಿಕ್ಕಿದ್ದು ದೊಡ್ಡ ಚೊಂಬು.
27 ಜನ ಬಿಜೆಪಿ ಮತ್ತು ಜೆಡಿಎಸ್ ಸಂಸದರ ಕೊಡುಗೆಯೂ ಚೊಂಬು.ಹಾಗಾಗಿ ಈ ಚುನಾವಣೆಯಲ್ಲಿ ನಾವೆಲ್ಲರೂ ಬಿಜೆಪಿಯ ಪಕ್ಷಕ್ಕೆ ಇದೇ ಚೊಂಬು ನೀಡೋಣ ಎಂದರು.

ಸರ್ಕಾರ ರಾಜ್ಯದಲ್ಲಿ ಮಹಿಳೆಯರಿಗೆ ತಿಂಗಳಿಗೆ 2 ಸಾವಿರ ರೂಪಾಯಿ ನೀಡುತ್ತಿದೆ. ಕೇಂದ್ರದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರತೀ ಅರ್ಹ ಕುಟುಂಬದ ಮಹಿಳೆಯರ ಅಕೌಂಟಿಗೆ ವರ್ಷಕ್ಕೆ ಒಂದು ಲಕ್ಷ ರೂಪಾಯಿ ಜಮೆ ಆಗುತ್ತದೆ. ರಾಜ್ಯ ಸರ್ಕಾರ ಕೊಡುವ ಪ್ರತಿ ತಿಂಗಳ 2 ಸಾವಿರ ರೂಪಾಯಿ ಕೂಡ ಇದಕ್ಕೆ ಸೇರಿ ವರ್ಷಕ್ಕೆ ಒಂದು ಲಕ್ಷದ 24 ಸಾವಿರ ರೂಪಾಯಿ ಪ್ರತೀ ಕುಟುಂಬಗಳ ಖಾತೆಗೆ ಬರುತ್ತದೆ ಎಂದರು.

ಇದರ ಜತೆಗೆ ಇಡೀ ದೇಶದ ಅಷ್ಟೂ ರೈತರ ಸಾಲ ಮನ್ನಾ ಮಾಡಲಾಗುವುದು.ವಿದ್ಯಾವಂತ ನಿರುದ್ಯೋಗಿ ಯುವಕರಿಗೆ ತರಬೇತಿ ಮತ್ತು ಒಂದು ಲಕ್ಷ ರೂಪಾಯಿ ವೇತನ ಸಿಗುತ್ತದೆ.
ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಖಚಿತವಾಗಿ ನೀಡಲಾಗುವುದು.ಪ್ರಧಾನಿ ನರೇಂದ್ರ ಮೋದಿಯ ಕೆಟ್ಟ ನೀತಿಯಿಂದಾಗಿ ಹದಗೆಟ್ಟಿರುವ ಭಾರತದ ಆರ್ಥಿಕತೆಯನ್ನು ಸರಿ ದಾರಿಗೆ ತಂದು ಜನರ ಪರವಾದ ಆರ್ಥಿಕತೆಯನ್ನು ಪುನರ್ ಸ್ಥಾಪಿಸುತ್ತೇವೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಚಿವರಾದ ಭೈರತಿ ಸುರೇಶ್ ಶಾಸಕರಾದ ಕೋತ್ತೂರು ಮಂಜುನಾಥ,ಎಸ್ ಎನ್ ನಾರಾಯಣಸ್ವಾಮಿ ,ನಜೀರ್ ಅಹಮದ್,ಅನಿಲ್ ಕುಮಾರ್ ಕೆ ವಿ ಗೌತಮ್ ಉಪಸ್ಥಿತರಿದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code