ಜಿಲ್ಲೆನ್ಯೂಸ್

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು: ಕೆಎಂ ಶಾಂತರಾಜು ಹೇಳಿಕೆ

ಇಂದಿನ ಮಕ್ಕಳೇ ನಾಳಿನ ಪ್ರಜೆಗಳು: ಕೆಎಂ ಶಾಂತರಾಜು ಹೇಳಿಕೆ

ಕೆಜಿಎಫ್-ಇಂದಿನ ಮಕ್ಕಳೇ ನಾಳಿನ ಪ್ರಜೆಗಳಾಗಿರುವುದರಿಂದ, ಪ್ರತಿಯೊಬ್ಬ ವಿದ್ಯಾರ್ಥಿಯು ಮಾದಕ ದ್ರವ್ಯ, ಮಾದಕ ವಸ್ತುಗಳಿಂದ ದೂರ ಉಳಿಯಬೇಕು, ಮಾದಕ ವ್ಯಸನಿಗಳಾಗಬಾರದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ.ಶಾoತರಾಜು ಹೇಳಿದರು.

ನಗರದ ಭಗವಾನ್ ಶ್ರೀ ಮಹಾವೀರ್ ಜೈನ್ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾದಕ ದ್ರವ್ಯಗಳ ಬಗೆಗಿನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಭವಿಷ್ಯತ್ತಿನ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಿಸಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವಹಿಸಬೇಕು. ಯಾವುದೇ ಕಾರಣಕ್ಕೂ ಮಾದಕ ವಸ್ತುಗಳನ್ನು ಬಳಸಬಾರದೆಂದರು. ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳ ಮಾರಾಟ, ಬಳಸುವಿಕೆಯನ್ನು ತಡೆಯುವಲ್ಲಿ ಯುವಜನತೆಯು ಪ್ರಮುಖ ಪಾತ್ರ ವಹಿಸಿ, ಮಾದಕ ವಸ್ತುಗಳ ಮುಕ್ತ ಸಮಾಜವನ್ನು ನಿರ್ಮಿಸಲು ಕರೆ ನೀಡಿದರು.
2023ನೇ ಸಾಲಿನ ಅಪರಾಧ ತಡೆ ಮಾಸಾಚರಣೆಯ ಕಾರ್ಯಕ್ರಮದ ಅಂಗವಾಗಿ, ನಗರ ಸೇರಿದಂತೆ ಸುತ್ತಮುತ್ತಲಿನ ಹಲವು ಗ್ರಾಮೀಣ ಪ್ರದೇಶಗಳಲ್ಲಿನ ಶಾಲೆ ಮತ್ತು ಕಾಲೇಜುಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಗಟ್ಟುವ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವು ನಡೆಸಲಾಯಿತು, ಸಮಾಜದಲ್ಲಿ ಮಾದಕ ವಸ್ತುಗಳನ್ನು ತಡೆಗಟ್ಟಲು ಯುವಜನತೆ ಸಹಕಾರವು ಅತ್ಯವಶ್ಯಕವಾಗಿದೆಯೆಂದರು. ಇದೇ ಸಂದರ್ಭದಲ್ಲಿ ಮಾದಕ ವಸ್ತುಗಳನ್ನು ಬಳಸುವುದಿಲ್ಲವೆಂದು ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.
ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಕೆಜಿಎಫ್ ಪೊಲೀಸ್ ಜಿಲ್ಲೆಯ ವಿವಿಧ ಶಾಲಾ, ಕಾಲೇಜುಗಳಲ್ಲಿ ಪ್ರಬಂಧ ಸ್ಪರ್ಧೆ, ಕಿರುನಾಟಕ, ರಸ ಪ್ರಶ್ನೆ, ನಿರೂಪಣೆ ಮತ್ತು ಚರ್ಚಾ ಸ್ಪರ್ಧೆ ಮೂಲಕ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆಯಿಂದ ಹಮ್ಮಿಕೊಳ್ಳಲಾಗಿತ್ತು.


ಡಾ.ಟಿ.ತಿಮ್ಮಯ್ಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಡಿವೈಎಸ್ಪಿ ಪಾಂಡುರoಗ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ವಿರುದ್ದ ಜಾಗೃತಿಯನ್ನು ಮೂಡಿಸಿ, ಪ್ರಬಂಧ ಸ್ಪರ್ಧೆ ನಡೆಸಿದರು. ಬೇತಮಂಗಲ ಸರಹದ್ದು ಬಂಗಾರುತಿರುಪತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿಇಎನ್ ಇನ್ಸ್ಪೆಕ್ಟರ್ ಕ್ಷ್ಮಿನಾರಾಯಣ ಅವರು ವಿಶೇಷ ಕಾರ್ಯಕ್ರಮ ನಡೆಸಿದರು.
ಕೆಜಿಎಫ್ ಘಟಕದ ಬೆಮೆಲ್ ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ವಿರುದ್ದ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಸುಂದರಪಾಳ್ಯ ಸರ್ಕಾರಿ ಪ್ರೌಢಶಾಲೆ ಮತ್ತು ಪಧವಿ ಪೂರ್ವ ಕಾಲೇಜು, ಸರ್ಕಾರಿ ಪ್ರೌಡಶಾಲೆ, ಕರಡಗೂರು, ಬೆನ್ನವಾರ ಗ್ರಾಮದ ಶ್ವೇತ ವಿದ್ಯಾಸಂಸ್ಥೆಯಲ್ಲಿ ವೃತ್ತ ನಿರೀಕ್ಷಕ ಸುರೇಶ್‌ರಾಜು, ಪಿ.ಎಸ್.ಐ ದೇವರಾಜ್ ಮತ್ತು ಪಿ.ಎಸ್.ಐ ಶ್ಯಾಮಲಾ ಮಾದಕ ವಸ್ತುಗಳ ವಿರುದ್ದ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಮತ್ತು ಪ್ರಬಂಧ ಸ್ಪರ್ಧೆ ಏರ್ಪಡಿಸಿ, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಿದರು.
ವಿವಿಧ ಶಾಲಾ ಕಾಲೇಜುಗಳಲ್ಲಿ ಮಾದಕ ದ್ರವ್ಯ ಹಾಗೂ ಮಾದಕ ವಸ್ತುಗಳಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ನಡೆಸಿದ ವಿಶೇಷ ಜಾಗೃತಿ ಕಾರ್ಯಕ್ರಮಗಳಲ್ಲಿ ಒಟ್ಟು 3610 ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code