ಜಿಲ್ಲೆನ್ಯೂಸ್

ಮಾತೃ ಭಾಷೆ ಕನ್ನಡವನ್ನು ಕನ್ನಡಿಗರಾದ ನಾವು ಉಳಿಸಿ ಬೆಳೆಸಬೇಕು.

ಮಾತೃ ಭಾಷೆ ಕನ್ನಡವನ್ನು ಕನ್ನಡಿಗರಾದ ನಾವು ಉಳಿಸಿ ಬೆಳೆಸಬೇಕು.

(KOLARA): ಬಂಗಾರಪೇಟೆ: ಮನಜಪಥ ವಿಶ್ವಪಥ ಸಂದೇಶವನ್ನು ಸಾರಿದ ಶ್ರೇಷ್ಟ ವಿಶ್ವ ಮಾನವ ಕುವೆಂಪು ರವರು ಸಮಾಜದಲ್ಲಿನ ಮೌಡ್ಯತೆಗಳನ್ನ ಹೋಗಲಾಡಿಸಲು ಶ್ರಮಿಸಿದರು, ಮಾತೃ ಭಾಷೆ ಕನ್ನಡವನ್ನು ಕನ್ನಡಿಗರಾದ ನಾವು ಉಳಿಸಿ ಬೆಳೆಸಬೇಕೆಂದು ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎನ್‌.ಬಿ ಗೋಪಾಲಗೌಡ ತಿಳಿಸಿದರು.

ಪಟ್ಟಣದ ನವಚೇತನ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನೋತ್ಸವ,ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಕನ್ನಡ ಭಾಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ,ಜನ್ಮದಿನೋತ್ಸವದ ಅಂಗವಾಗಿ ಶತಮಾನ ಕಂಡ ದೈತ್ಯ ಪ್ರತಿಭೆ ಅವರೊಬ್ಬ ರಸಋಷಿ. ತಮ್ಮ ಮೇರು ಕೃತಿ ಶ್ರೀರಾಮಾಯಣ ದರ್ಶನಂನಲ್ಲಿ ಈ ಕಾಲಕ್ಕೆ ಅಗತ್ಯವಾದ ದರ್ಶನವನ್ನು ನೀಡಿದ್ದಾರೆ. ಅವರ ಎರಡು ಬೃಹತ್ ಕಾದಂಬರಿಗಳಾದ ’ಕಾನೂರು ಹೆಗ್ಗಡತಿ’ ಹಾಗೂ ’ಮಲೆಗಳಲ್ಲಿ ಮದುಮಗಳು’ ಅವರನ್ನು ಜಗತ್ತಿನ ಮಹಾನ್ ಕಾದಂಬರಿಕಾರರ ಸಾಲಿನಲ್ಲಿ ನಿಲ್ಲುವಂತೆ ಮಾಡಿವೆ. ಮೈಸೂರು ವಿಶ್ವವಿದ್ಯಾಲಯಕ್ಕೆ ಅಪಾರ ಕೊಡುಗೆಯನ್ನು ನೀಡಿದವರಲ್ಲಿ ಕುವೆಂಪುರವರು ಮೊದಲಿಗರೆಂದು ಮೌಲ್ಯಯುತ ಶಿಕ್ಷಣದ ಮಹತ್ವವನ್ನು ತಿಳಿಸಿದರು.

ಈ ವೇಳೆ ಶ್ಯಾಮಲಾ ರವರು ಮಾತನಾಡಿ,ಕುವೆಂಪು ಒಬ್ಬ ದಾರ್ಶನಿಕ ಲೇಖಕರು. ವರ್ತಮಾನದ ನಿತ್ಯವನ್ನೂ, ತ್ರಿಕಾಲದ ಭವ್ಯವನ್ನೂ, ಭೂಮವನ್ನೂ, ಅಲ್ಪವನ್ನೂ ಒಂದು ಪೂರ್ಣ ದೃಷ್ಟಿಯಲ್ಲಿ ಒಳಗೊಳ್ಳಲು ಪ್ರಯತ್ನಿಸಿದ ತಪಸ್ವಿಗಳು. ‘ಕಾಡಿನ ಕೊಳಲಿದು, ಕಾಡ ಕವಿಯು ನಾ, ನಾಡಿನ ಜನರೊಲಿದಾಲಿಪುದು’ ಎಂಬ ಬಿನ್ನಹದೊಂದಿಗೆ ಕಳೆದ ಶತಮಾನದ 3ನೆಯ ದಶಕದಲ್ಲಿ ಕನ್ನಡ ನವೋದಯವನ್ನು ಪ್ರವೇಶಿಸಿದ ಈ ಕಾಡಿನ ಕವಿ ಅನಂತರ ನಾಡಿನ ಕವಿಯಾಗಿ ಕುವೆಂಪು ಎಂಬ ಮೂರಕ್ಷರದಿಂದಲೇ ಕನ್ನಡಿಗರ ಮನೆ ಮಾತಾದ ರಾಷ್ಟ್ರಕವಿ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ, ಹೊಸಗನ್ನಡ ಸಾಹಿತ್ಯದ ಹಿರಿಯ ಕವಿ. ಕನ್ನಡ ಸಾಹಿತ್ಯವನ್ನು ವಿಶ್ವ ಸಾಹಿತ್ಯ ವೇದಿಕೆಗೆ ಕೊಂಡೊಯ್ದ ವಿಶ್ವಮಾನವ, ಕನ್ನಡದ ಮಹಾನ್ ಚೇತನ ಎಂದು ಹೇಳಿದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷ ಆರ್ ಸಂಜೀವಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆಂಜನೇಯ ಗೌಡ,ನವಚೇತನ ವಿದ್ಯಾ ಸಂಸ್ಥೆಯ ಕಾರ್ಯದರ್ಶಿ ರಾಮಕೃಷ್ಣಪ್ಪ, ಅನಿಕೇತನ ಬಳಗದ ಅಧ್ಯಕ್ಷರಾದ ರಾಮ್ ಪ್ರಸಾದ್, ಎಸ್ಸಿ ಎಸ್ಟಿ ನೌಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಶ್ಯಾಮ್ ಮೂರ್ತಿ, ಬಿ ಆರ್ ಸಿ ವಿಜಿ ಕುಮಾರ್,ಇಸಿಓ.ವೆಂಕಟರಮಣಪ್ಪ, ಲೀಲಾ, ಮಂಜುನಾಥ್ ಮೊದಲಾದವರು ಇದ್ದರು.

ವರದಿ: ವಿಷ್ಣು ಕೋಲಾರ

Leave a Reply

Your email address will not be published. Required fields are marked *

Scan the code